ಬಿಜೆಪಿ ಅಭಿಪ್ರಾಯ ಸಂಗ್ರಹಣೆ ಸಭೆ: ಮುಖಂಡರಿಂದ ಭಿನ್ನ ಅಭಿಪ್ರಾಯಗಳು ವ್ಯಕ್ತ, ಪುತ್ತೂರು ಕ್ಷೇತ್ರದ ಸೋಲಿನ ಬಗ್ಗೆ ಚರ್ಚೆ
ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಕ್ಷೇತ್ರಗಳಲ್ಲಿ ಯಾವ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ ನಾಯಕರು ಬೆಂಗಳೂರು ನಗರದ ಯಲಹಂಕದಲ್ಲಿರುವ ಖಾಸಗಿ ರೆಸಾರ್ಟ್ನಲ್ಲಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಆದರೆ, ಸಭೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಅರುಣ್ ಕುಮಾರ್ ಪುತ್ತಿಲ ಬಂಡಾಯದ ಸ್ಪರ್ಧೆಯಿಂದ ಬಿಜೆಪಿ ಹೊಡೆತ ತಿಂದ ಬಗ್ಗೆ ಹೆಚ್ಚು ಚರ್ಚೆಯಾಗಿದೆ. ಇಂತಹ ತಪ್ಪು ನಿರ್ಧಾರ ಕೈಗೊಳ್ಳದಂತೆ ಮುಖಂಡರು ಎಚ್ಚರಿಕೆಯ ಸಲಹೆಯನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭಿಪ್ರಾಯ ಸಂಗ್ರಹದ ವೇಳೆ ವಿಧಾನಸಭಾ ಚುನಾವಣೆಯಲ್ಲಿನ ಪುತ್ತೂರು ಕ್ಷೇತ್ರದಲ್ಲಿ ಪಕ್ಷದ ಸೋಲಿನ ಬಗ್ಗೆಯೇ ಹೆಚ್ಚು ಚರ್ಚೆ ನಡೆಯಿತು. ಸುಳ್ಯದಿಂದ ಅಭ್ಯರ್ಥಿ ಕರೆದುಕೊಂಡು ಬಂದು ಪುತ್ತೂರಿನಲ್ಲಿ ಟಿಕೆಟ್ ಕೊಟ್ಟಿದ್ದು ಸೋಲಿಗೆ ಕಾರಣವಾಗಿದೆ. ಆ ರೀತಿ ಮಾಡಬಾರದಿತ್ತು. ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಕೂಡಾ ನಮ್ಮವರೇ. ಲೋಕಸಭಾ ಚುನಾವಣೆಗೆ ಎಲ್ಲರೂ ಒಟ್ಟಿಗೆ ಹೋಗುವ ಕೆಲಸ ಆಗಬೇಕು ಎಂದು ಮುಖಂಡರು ಸಲಹೆ ನೀಡಿದ್ದಾರೆ.
ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಗೈರಾಗಿದ್ದಾರೆ. ಜಿಲ್ಲೆಯಲ್ಲಿ ಕಟೀಲ್ ಅವರಿಗೆ ಟಿಕೆಟ್ ನೀಡದಂತೆ ಬಿಜೆಪಿ ಕಾರ್ಯಕರ್ತರೇ ಹೇಳುತ್ತಿದ್ದಾರೆ. ಕಟೀಲ್ ಕೆಲಸದ ಬಗ್ಗೆಯೂ ಟೀಕಿಸುತ್ತಿದ್ದಾರೆ. ಈ ನಡುವೆ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳಿ ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ನಡೆಸಿ ಸೋಲುಂಡಿರುವ ಹಿಂದೂ ಯುವ ನಾಯಕ ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಮಾತ್ರವಲ್ಲದೆ ಜಿಲ್ಲಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ಇವರಿಗೆ ಟಿಕೆಟ್ ನೀಡಬೇಕು ಎಂದು ಪುತ್ತಿಲ ಪರಿವಾರ ಒತ್ತಾಯಿಸುತ್ತಾ ಬರುತ್ತಿದೆ.



