ಬೆಂಗಳೂರಿನಲ್ಲಿ ಅಕ್ರಮ ಬೋರ್ವೆಲ್ ಕೊರೆಸಿದವರಿಗೆ ದಂಡದ ಬರೆ

ಬೆಂಗಳೂರು: ಜಧಿಲಮಂಡಳಿ ನಿಯಮ ಉಲ್ಲಂಘಿಸಿ ನಗರದಲ್ಲಿ ಕೊಳವೆ ಬಾವಿ ಕೊರೆಯುವವರಿಗೆ ಸಂಕಷ್ಟ ಎದುರಾಗಿದೆ. ಕಳೆದ ಒಂದು ತಿಂಗಳಲ್ಲಿ ಅನಧಿಕೃತವಾಗಿ ಕೊಳವೆಬಾವಿ ಕೊರೆಸಿರುವ ಸಂಬಂಧ 36 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ನೈರುತ್ಯ ಉಪವಿಭಾಗ 1 ಮತ್ತು 2ರಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆ.ಹೌದು, ನಗರದಲ್ಲಿ ಮಳೆ ಕೊರತೆಯಿಂದಾಗಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದೆ. ಸುಮಾರು 3.50 ಲಕ್ಷ (ವೈಯಕ್ತಿಕ) ಕೊಳವೆಬಾವಿಗಳಲ್ಲಿ ಶೇ.75ರಷ್ಟು ಬತ್ತಿ ಹೋಗಿವೆ. ಉಳಿಕೆ ಕೊಳವೆಬಾವಿಗಳಲ್ಲಿಯೂ ನೀರು ಕಡಿಮೆಯಾಗಿದೆ. ಅವೈಜ್ಞಾನಿಕ ಕೊಳವೆಬಾವಿಗಳನ್ನು ಕೊರೆಯುತ್ತಿರುವುದು ಹಾಗೂ ನಿಯಮಾನುಸಾರ ಕೊಳವೆಬಾವಿ ಕೊರೆಯುವ ಮುನ್ನ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯದಿರುವುದರಿಂದ ನಗರದಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂತರ್ಜಲವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಲಮಂಡಳಿ ಕೊಳವೆಬಾವಿ ಕೊರೆಸಲು ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಮಾರ್ಚ್ 3ರಂದು ಆದೇಶಿಸಿತ್ತು. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ- 2011 ಕಂಡಿಕೆ 11 ಮತ್ತು 17ರನ್ವಯ ಕೊಳವೆಬಾವಿ ಕೊರೆಸುವ ಸಂಬಂಧ ಎರಡೂ ನಿಯಮಗಳನ್ನು ವಿಧಿಸಿ, ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ಉಲ್ಲೇಖಿಸಿತ್ತು. ಈ ನಿಯಮ ಉಲ್ಲಂಘಿಸಿ ಬೋರ್ವೆಲ್ ಕೊರೆಸಿದ 36 ಪ್ರಕರಣ ದಾಖಲಾಗಿವೆ.
ಅನುಮತಿಗೆ ಅರ್ಜಿ ಸಲ್ಲಿಸಿ
ಕೊಳವೆಬಾವಿ ಕೊರೆಸುವುದಕ್ಕೆ ಅನುಮತಿ ಪಡೆಯಲು ಬೆಂಗಳೂರು ಜಲಮಂಡಳಿಯ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬರುವ ಅರ್ಜಿಗಳನ್ನು ಪರಿಶೀಲಿಸಿ, ಸಾರ್ವಜನಿಕ ಕೊಳವೆಬಾವಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಖಾಸಗಿ ಕೊಳವೆಬಾವಿಗಳಿಗೆ ಅಂತರ್ಜಲ ಮಟ್ಟ, ಅವಶ್ಯಕತೆ ಮತ್ತು ತಜ್ಞರ ವರದಿ ಆಧರಿಸಿ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿದ ನಂತರ ಅನುಮತಿ ನೀಡಲಾಗುವುದು ಎಂದು ಜಲಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ನಿಯಮಗಳೇನು?
ಕರ್ನಾಟಕ ಅಂತರ್ಜಲ( ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಕಂಡಿಕೆ 11ರನ್ವಯ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಎಲ್ಲಿ ಕೊಳವೆಬಾವಿ ಕೊರೆಯಬೇಕೆಂದರೆ ಸಂಬಂಧಪಟ್ಟ ಪ್ರಾಧಿಕಾರಿ/ಮಂಡಳಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯುವುದು. ನಿಯಮ ಉಲ್ಲಂಘಿಸಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು. ಕಂಡಿಕೆ 17ರನ್ವಯ ಯಾವ ಸ್ಥಳದಲ್ಲಿ ಕೊಳವೆಬಾವಿ ಕೊರೆಯಲು ಅನುಮತಿ ನೀಡಲಾಗುತ್ತದೆಯೋ, ಅದೇ ಸ್ಥಳದಲ್ಲಿ ಬೋರ್ ಕೊರೆಯುವುದು ಕಡ್ಡಾಯ. ಈ ನಿಯಮ ಉಲ್ಲಂಘಿಸಿದವರಿಗೆ ಕೊಳವೆಬಾವಿ ಕೊರೆಸಲು ನೀಡಿರುವ ಅನುಮತಿ ರದ್ದುಪಡಿಸಲಾಗುವುದು ಮತ್ತು ಕಾನೂನು ಕ್ರಮ ಜರುಗಿಸಲಾಗುವುದು. 36 ಪ್ರಕರಣಗಳಲ್ಲಿ ಕೊಳವೆಬಾವಿ ಕೊರೆಯುವ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಅವುಗಳನ್ನು ತಡೆಹಿಡಿಯಲಾಗಿದ್ದು, ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಜಲಮಂಡಳಿ ತಿಳಿಸಿದೆ.
ರಾತ್ರಿ ವೇಳೆ ಹೆಚ್ಚು
ಅಧಿಕಾರಿಗಳಿಗೆ ತಿಳಿಯಲಿದೆ ಎಂಬ ಕಾರಣದಿಂದ ವಾರಾಂತ್ಯದ ದಿನ ಮತ್ತು ರಾತ್ರಿ ವೇಳೆ ಕೊಳವೆಬಾವಿ ಕೊರೆಸಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಹೀಗಾಗಿ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿಯಮ ಮೀರಿ ಕೊಳವೆಬಾವಿಗಳನ್ನು ಕೊರೆಯುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ಜಲಮಂಡಳಿಯ ಸಹಾಯವಾಣಿ ಸಂಖ್ಯೆ 1916ಗೆ ಕರೆಮಾಡಿ ಮಾಹಿತಿ ನೀಡಬಹುದು. ಕೂಡಲೇ ಸ್ಥಳಕ್ಕೆ ಭೇಟಿ ನೀಡುವ ಅಧಿಕಾರಿಗಳು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಿದ್ದಾರೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ.
ಶಿಕ್ಷೆ ಏನು?
ಅನುಮತಿ ಪಡೆಯದೆ ಕೊಳವೆಬಾವಿ ಕೊರೆಸಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಪೊಲೀಸರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಿದ್ದಾರೆ. ಕೊಳವೆಬಾವಿ ಕೊರೆದವರು ಮತ್ತು ಕೊರೆಸಿದವರು ಇಬ್ಬರಿಗೂ ಶಿಕ್ಷೆಯಾಗಲಿದೆ. ನ್ಯಾಯಾಲಯ ದಂಡ ಅಥವಾ 6 ತಿಂಗಳು ಜೈಲು ಶಿಕ್ಷೆ ಯಾವುದನ್ನು ಬೇಕಾದರೂ ವಿಧಿಸಬಹುದು ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.



