ಇತ್ತೀಚಿನ ಸುದ್ದಿರಾಜ್ಯ

ಡಿಸಿಎಂ ವಿರುದ್ಧ ಮುಗಿಬಿದ್ದ ಉದ್ಯಮಿಗಳು, ವಿಪಕ್ಷದ ನಾಯಕರು

“ಇನ್ನು ಎರಡು- ಮೂರು ವರ್ಷ ಭಗವಂತನೇ ಭೂಮಿಗೆ ಅವತರಿಸಿ ಬಂದರೂ ಬೆಂಗಳೂರು ಉದ್ದಾರ ಮಾಡಲು ಆಗುವುದಿಲ್ಲ” ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಒಂದು ಹೇಳಿಕೆ ಇದೀಗ ಸ್ವತಃ ಅವರಿಗೆ ಮುಳುವಾಗಿದೆ. ಡಿಕೆಶಿ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಬೆಂಗಳೂರು ಮೂಲಕ ಉದ್ಯಮಿಗಳು ಮಾತ್ರವಲ್ಲ ವಿಪಕ್ಷ ನಾಯಕರು ಇದಕ್ಕೆ ತಿರುಗೇಟು ನೀಡಿದ್ದಾರೆ. ಹಾಗಾದ್ರೆ ‘ಬ್ರ್ಯಾಂಡ್ ಬೆಂಗಳೂರು’ ಗೆ ಅರ್ಥ ಏನು ಎಂದೂ ಪ್ರಶ್ನಿಸಿದ್ದಾರೆ.ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ “ನಮ್ಮ ರಸ್ತೆ – ವಿನ್ಯಾಸ ಕಾರ್ಯಾಗಾರ” ಉದ್ಘಾಟನೆ ಮತ್ತು ಸಂಚಾರ ಪ್ರಯೋಗಾಲಯಕ್ಕೆ ಚಾಲನೆ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದ್ದ ಅವರು “ಕೇವಲ ಎರಡು- ಮೂರು ವರ್ಷಗಳಲ್ಲಿ ಬೆಂಗಳೂರನ್ನು ಬದಲಾಯಿಸಲು ಆಗುವುದಿಲ್ಲ. ಮೇಲಿರುವ ಭಗವಂತ ಕೆಳಗೆ ಬಂದರೂ ಸಾಧ್ಯವಿಲ್ಲದ ಕೆಲಸ. ಆದರೆ ನಾವು ಯೋಜನೆಗಳ ರೂಪುರೇಷೆಗಳನ್ನು ಸರಿಯಾಗಿ ಮಾಡಿ, ಅನುಷ್ಠಾನಕ್ಕೆ ತಂದರೆ ಮಾತ್ರ ಇದು ಸಾಧ್ಯವಾಗುತ್ತದೆ. ರಕ್ಷಣೆ, ಗುಣಮಟ್ಟ ಮತ್ತು ಏಕರೂಪತೆ ಕಾಪಾಡುವುದು ನಮ್ಮ ಗುರಿ” ಎಂದು ಹೇಳಿದ್ದರು.ಡಿಕೆಶಿ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಪ್ರತಿಕ್ರಿಯೆ ನೀಡಿ “ಕಳೆದ 2 ವರ್ಷಗಳಲ್ಲಿ ಬೆಂಗಳೂರಿನ ಅಭಿವೃದ್ಧಿ ದೊಡ್ಡ ಸೊನ್ನೆ ಎಂದು ಟೀಕಿಸಿದ್ದಾರೆ. ಬೆಂಗಳೂರು ರಸ್ತೆಯಲ್ಲಿ ಬಿದ್ದು ಆಸ್ಪತೆಗೆ ಹೋಗುವ ಜನಸಾಮಾನ್ಯರ ಸಂಖ್ಯೆಯೂ ಜಾಸ್ತಿ ಆಗುತ್ತಿದೆ. ಸಿಟಿ ಮಾರ್ಕೆಟ್‍ನಿಂದ ಆರಂಭಿಸಿ ಎಲ್ಲ ಮಾರ್ಕೆಟ್‍ಗಳಲ್ಲೂ ಕಸದ ರಾಶಿ ಗೋಪುರದ ರೀತಿ ಬಿದ್ದಿದೆ. ಈ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಬೆಂಗಳೂರಿಗರಿಗೆ ದೊಡ್ಡ ಕನಸನ್ನು ಕೊಟ್ಟಿತ್ತು. ಬೆಂಗಳೂರನ್ನು ಹಿಮಾಲಯ ಪರ್ವತದ ಶಿಖರದ ರೀತಿಯಲ್ಲಿ ನಾವು ಬ್ರ್ಯಾಂಡ್ ಬೆಂಗಳೂರು ಮಾಡಿ, ಇಡೀ ಪ್ರಪಂಚಕ್ಕೆ ಬೆಂಗಳೂರನ್ನು ತೋರಿಸುವುದಾಗಿ ಹೇಳಿದ್ದರು. ಈಗ ಅದೇ ವ್ಯಕ್ತಿ, ಅದೇ ಮಂತ್ರಿ, ಅದೇ ಉಸ್ತುವಾರಿ ಸಚಿವರು, ಆ ಭಗವಂತ ಬಂದರೂ ಈ ಬೆಂಗಳೂರನ್ನು ಉದ್ಧಾರ ಮಾಡಲು ಅಸಾಧ್ಯ ಎನ್ನುವುದರ ಅರ್ಥ ಏನು” ಎಂದು ಪ್ರಶ್ನಿಸಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ “ .ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದವರು; ಬೆಂಗಳೂರನ್ನು ಸಿಂಗಾಪುರ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದವರು. ಅಂಥ ಸಚಿವರ ಬಾಯಲ್ಲಿ ಬಂದ ಮಾತು ಇದು ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಸರಕಾರದ ಯೋಗ್ಯತೆಗೆ ಬೆಂಗಳೂರು ಮಹಾನಗರದಲ್ಲಿ ಗುಂಡಿ ಮುಚ್ಚಲು ಸಾಧ್ಯ ಆಗುತ್ತಿಲ್ಲ. ಬೆಂಗಳೂರಿನಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ಶಾಸಕರಿಗೆ ಹಣ ಕೊಡುತ್ತಿಲ್ಲ. ಇವರು ಅಭಿವೃದ್ಧಿ ಬಗ್ಗೆ ಮಾತನಾಡುವುದು ದುರಂತ. ಭಾರತವನ್ನು ಬೆಂಗಳೂರಿನ ಮುಖೇನ ನೋಡುತ್ತಾರೆ. ಡಿ.ಕೆ.ಶಿವಕುಮಾರ್ ಅವರ ಇಂಥ ಹೇಳಿಕೆ ಸಹಜವಾಗಿ ಸಾಕಷ್ಟು ಜನರಿಗೆ ಬೇಸರ ತಂದಿದೆ” ವಾಗ್ದಾಳಿ ನಡೆಸಿದ್ದಾರೆ.ಇನ್ನು ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಉದ್ಯಮಿ ಮೋಹನ್ ದಾಸ್ ಪೈ “ಆ ದೇವರು ಇನ್ನೂ ಬೆಂಗಳೂರನ್ನು ಕೈಬಿಟ್ಟಿಲ್ಲ.ಬಹುಶಃ ನಮ್ಮ ಮಂತ್ರಿಗಳನ್ನು ಕೈಬಿಟ್ಟಿರಬಹುದು.ಇದು ಆಡಳಿತ ವೈಫಲ್ಯ ಒಪ್ಪಿಕೊಳ್ಳುವುದಾಗಿದೆ” ಎಂದು ಕಿಡಿಕಾರಿದ್ದಾರೆ. ದಯವಿಟ್ಟು ಬೆಂಗಳೂರು ಅಭಿವೃದ್ಧಿ ಮೇಲೆ ಗಮನಹರಿಸಿ ಮತ್ತು ನಮ್ಮ ಜೀವನವನ್ನು ಸುಧಾರಿಸಿ. ಬೆಂಗಳೂರು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಬರೋಬ್ಬರಿ 1 ಲಕ್ಷ ಮೆಟ್ರೋ ಪ್ರಯಾಣಿಕರು ಕಡಿಮೆ ಆಗುವಂತೆ ದರ ಹೆಚ್ಚಳ ಮಾಡಿ ಘೋಷಣೆ ಮಾಡಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ದಿ ಸಚಿವರಾಗಿ 2 ವರ್ಷಗಳಾಗಿವೆ. ನಾವು ನಿಮ್ಮನ್ನು ಪ್ರಬಲ ಸಚಿವರೆಂದು ಆದರದಿಂದ ಶ್ಲಾಘಿಸಿ ಸ್ವಾಗತಿಸಿದ್ದೇವೆ. ಆದರೆ, ನಮ್ಮ ಜೀವನವು ತುಂಬಾ ಕೆಟ್ಟದಾಗಿ ಪರಿವರ್ತನೆ ಆಗುತ್ತಿದೆ. ಸರ್ಕಾರದಿಂದ ದೊಡ್ಡ ದೊಡ್ಡ ಯೋಜನೆಗಳನ್ನು ಘೋಷಿಸಲಾಗಿದೆ. ಆದರೆ, ಸರ್ಕಾರ ನಗರದಲ್ಲಿ ಯಾವುದೇ ಯೋಜನೆಯನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಒಟ್ಟಿನಲ್ಲಿ ಡಿಕೆ ಶಿವಕುಮಾರ್ ನೀಡಿರುವ ಈ ಹೇಳಿಕೆ ಮತ್ತು ಬೆಂಗಳೂರಿನ ಇಂದಿನ ಸ್ಥಿತಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ವಿರೋಧ ಪಕ್ಷಗಳು ಮಾತ್ರವಲ್ಲ ನಗರದ ಜನಸಾಮಾನ್ಯರು ಬೆಂಗಳೂರಿನ ಇಂದಿನ ಪರಿಸ್ಥಿತಿಯಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ. ಆದರೆ ಇದಕ್ಕೆ ಪರಿಹಾರ ಕೊಡುವ ಬದಲಾಗಿ ದೇವರ ಮೇಲೆ ಭಾರ ಹಾಕಿದರೆ ಹೇಗೆ ಎಂಬ ಪ್ರಶ್ನೆಯೂ ಉದ್ಭವಿಸುತ್ತಿದೆ.


Related Articles

Leave a Reply

Your email address will not be published. Required fields are marked *

Back to top button