ರಾಜ್ಯ
Trending

ಬೆಂಗಳೂರಿನಲ್ಲಿ ಭಾರೀ ಗಾಳಿ ಮಳೆ, ಹಲವೆಡೆ ಟ್ರಾಫಿಕ್ ಜಾಮ್

ಬೆಂಗಳೂರು: ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ (Rain) ರಾಜಧಾನಿ ಬೆಂಗಳೂರಿಗೆ (Bengaluru) ಮತ್ತೆ ಎಂಟ್ರಿ ಕೊಟ್ಟಿದ್ದಾನೆ. ಸೋಮವಾರ (ಮೇ.12) ಸಂಜೆಯಿಂದಲೇ ಬೆಂಗಳೂರಿನಲ್ಲಿ ಮಳೆ ಬರುತ್ತಿದೆ. ಸಂಜೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಜೋರಿ ಗಾಳಿ ಸಹಿತ ಮಳೆಯಾಗುತ್ತಿದೆ. ಇದರಿಂದ ಕಚೇರಿಗಳಿಂದ ಮನೆಗೆ ತೆರಳುತ್ತಿದ್ದ ಉದ್ಯೋಗಿಗಳು ಮತ್ತು ಬೀದಿ ಬದಿ ವ್ಯಾಪಾರಸ್ಥರು ಪರದಾಡುವಂತಾಯಿತು.ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಗುಡುಗು ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನ ಹೃದಯ ಭಾಗ ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ರೇಸ್ ಕೋರ್ಸ್, ಆನಂದ್ ರಾವ್ ಸರ್ಕಲ್, ಮೈತ್ರಿ ಸರ್ಕಲ್, ವಿಧಾನಸೌಧ, ಶಿವಾನಂದ ಸರ್ಕಲ್, ಕೆಆರ್ ಸರ್ಕಲ್ ಸುತ್ತಮುತ್ತ ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಜಾಮ್​ ಉಂಟಾಗಿದೆ.

ಮಾನ್ಯತ ಟೆಕ್ ಪಾರ್ಕ್ ಬಳಿ ಬಿಎಂಟಿಸಿ ಬಸ್ ಒಳಗೆ ಮಳೆ ನೀರು ನುಗ್ಗಿದೆ. ಭಾರಿ ಮಳೆಯಿಂದ ರಸ್ತೆ ಜಲಾವೃತಗೊಂಡಿದ್ದು, ರಸ್ತೆಯಿಂದ ಬಸ್ ಒಳಭಾಗಕ್ಕೆ ಮಳೆ ನೀರು ಹರಿದಿದೆ. ಮಳೆ ಹಿನ್ನೆಲೆಯಲ್ಲಿ ಡಬಲ್ ರೋಡ್​ನಲ್ಲಿ ನಿಧಾನಗತಿಯ ಸಂಚಾರವಿದೆ. ಮಳೆಯ ಹೊಡೆತಕ್ಕೆ ಬೈಕ್ ಸವಾರರು ಬಸ್ ಸ್ಟ್ಯಾಂಡ್​ನಲ್ಲಿ ಆಶ್ರಯ ಪಡೆದರು.

ಜೋರು ಮಳೆ ಮತ್ತು ಗಾಳಿಯಿಂದ ವಿಂಡ್ಸನ್ ಮ್ಯಾನರ್ ಅಂಡರ್ ಪಾಸ್​ನಿಂದ ಅರಮನೆ ಮೈದಾನ ಕಡೆ ಹೋಗುವ ಮಾರ್ಗದಲ್ಲಿ ಕಾವೇರಿ ಜಂಕ್ಷನ್ ಬಳಿ ಮರದ ಕೊಂಬೆ ಮುರಿದು ಬಿದ್ದಿದೆ. ಮರದ ಕೊಂಬೆ ಮುರಿದು ಬೀಳುವಾಗ ಯಾವುದೇ ವಾಹನ ಸಂಚಾರ ಇರಲಿಲ್ಲ. ಹೀಗಾಗಿ ಅನಾಹುತ ತಪ್ಪಿದೆ. ಹಾಗೇ ಮಲ್ಲೇಶ್ವರದ ಪಿಯುಸಿ ಬೋರ್ಡ್​ ಕಟ್ಟಡದ ಬಳಿ ಗಾಳಿ ಮತ್ತು ಮಳೆಗೆ ಮರ ಬಿದ್ದಿದೆ. ಯಾವುದೆ ಹಾನಿ ಸಂಭವಿಸಿಲ್ಲ.

ಮಳೆಯಿಂದಾಗಿ ಮಾರತ್ತಹಳ್ಳಿ ಸೇತುವೆಯಿಂದ ಕಾರ್ತಿಕನಗರದತ್ತ ಸಾಗುವ ರಸ್ತೆಯಲ್ಲಿ ನಿಧಾನಗತಿಯಲ್ಲಿ ಸಂಚಾರವಿದೆ. ಯಲಹಂಕದಿಂದ ಕೊಡಿಗೇಹಳ್ಳಿ ಮಾರ್ಗವಾಗಿ ವಾಹನ ಸಂಚಾರ ನಿಧಾನಗತಿಯಲ್ಲಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಬೀದರ್​, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ತುಮಕೂರು, ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಕೋಲಾರ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಜೋರು ಮಳೆಯಾಗಲಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button